ಬೆಳಗಾವಿ: ರಾಜ್ಯದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. 3000 ಬಾಣಂತಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ, ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾಯಿ ಮತ್ತು ಮಗು ಆರೋಗ್ಯವಾಗಿ ಇರಲೆಂದು ಈ ಸರ್ಕಾರಿ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 10.30ಕ್ಕೆ, 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದರು.
ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ – ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು.
ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮೇಳವನ್ನು ಆಯೋಜಿಸಲಾಗಿದ್ದು, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಾರವಾರ, ಗದಗ ಹಾಗೂ ಧಾರವಾಡ ಹೀಗೆ 7 ಜಿಲ್ಲೆಗಳ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಮ್ ಅಡಿ ಸ್ತ್ರೀ ಶಕ್ತಿ ಗುಂಪುಗಳು ಪಾಲ್ಗೊಂಡು ಸದರಿ ಮಳಿಗೆಗಳಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ-ತಿನಿಸುಗಳ ವ್ಯಾಪಾರ, ಲಂಬಾಣಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗಗಳು ಇತ್ಯಾದಿ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಬೇಟಿ ಬಚಾವೊ, ಬೇಟಿ ಫಡಾವೊ ಕಾರ್ಯಕ್ರಮದಡಿ ಹೆಣ್ಣು ಮಗುವಿನ ಹೆಸರಿನಲ್ಲಿ ಗಿಡವನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಈ ಕಾರ್ಯಕ್ರಮದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭಾಗವಹಿಸುತ್ತಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಂಸದರಿಗೆ ಆಹ್ವಾನ ಕೊಟ್ಟಿದ್ದೇವೆ. ಇದು ಮೊದಲ ಕಾರ್ಯಕ್ರಮ. ಇದರ ಯಶಸ್ಸು ಆಧರಿಸಿ, ವಿವಿಧ ಹಂತಗಳಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಮಾಡಲಾಗುವುದು. ಇದೇ 26ರಂದು ಬಳ್ಳಾರಿಯಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದರು.